ಮೈಸೂರು, ಸೆಪ್ಟಂಬರ್,17,2026 (www.justkannada.in): ಎಲ್ಲರಿಗೂ ಗುಣಮಟ್ಟದ ಶಿಕ್ಷಣ ದೊರೆಯುವುದು ಅವಶ್ಯ. . ಆದ್ದರಿಂದಲೇ ನಾನು ದೇವಸ್ಥಾನದ ಗಂಟೆ ಹೊಡೆಯದಿದ್ದರೂ ಪರವಾಗಿಲ್ಲ, ಆದರೆ ಶಾಲೆಗಳ ಗಂಟೆ ಹೊಡೆದರೆ ಮಕ್ಕಳು ಉದ್ಧಾರವಾಗುತ್ತಾರೆ, ದೇಶ ಉದ್ಧಾರವಾಗುತ್ತದೆ ಎಂದು ಹೇಳುತ್ತಲೇ ಇರುತ್ತೇನೆ. ಮಕ್ಕಳ ಕೆಲಸವೆಂದರೆ ದೇವರ ಕೆಲಸ ಎಂಬ ಕಾರಣಕ್ಕೇ ಮತ್ತೆ ಶಿಕ್ಷಣ ಇಲಾಖೆಯನ್ನು ಆಯ್ಕೆ ಮಾಡಿಕೊಂಡಿದ್ದೇನೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಮೈಸೂರಿನ ಕೆ.ಎಚ್.ಬಿ.ಐ. ಬಡಾವಣೆಯಲ್ಲಿ ಗುರುವಾರ ಜೆಎಸ್ಎಸ್ ಪದವಿ ಪೂರ್ವ ಕಾಲೇಜಿನ ನೂತನ ಕಟ್ಟಡ ಹಾಗೂ ಶ್ರೀ ಘನಲಿಂಗ ಶಿವಯೋಗಿ ಸಭಾಭವನವನ್ನು ಉದ್ಘಾಟಿಸಿ ಸಚಿವ ಮಧು ಬಂಗಾರಪ್ಪ ಅವರು ಮಾತನಾಡಿದರು.
ಜೆಎಸ್ಎಸ್ ಸಂಸ್ಥಾನದೊಂದಿಗೆ ತಮ್ಮ ಕುಟುಂಬ ಹಿಂದಿನಿಂದಲೂ ಆತ್ಮೀಯ ನಂಟು ಹೊಂದಿದೆ. ಅನ್ನದಾಸೋಹ ಮತ್ತು ಅಕ್ಷರ ದಾಸೋಹದ ಮೂಲಕ ರಾಜ್ಯದ ಬಡ ಜನರ ಮಕ್ಕಳಿಗೆ ಆಶ್ರಯ ತಾಣ ಒದಗಿಸುತ್ತಿರುವ ಜೆಎಸ್ಎಸ್ ಸಂಸ್ಥೆಯ ಕಾರ್ಯ ನಿಜಕ್ಕೂ ಶ್ರೇಷ್ಠವಾದುದು ಎಂದು ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು.
1954ರಲ್ಲಿ ಜೆಎಸ್ಎಸ್ ಮಹಾವಿದ್ಯಾಪೀಠ ಸ್ಥಾಪನೆಯಾಗಿ, ಪೂರ್ವ ಪ್ರಾಥಮಿಕ ಶಿಕ್ಷಣದಿಂದ ಉನ್ನತ ಶಿಕ್ಷಣದವರೆಗೆ 386 ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ. ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಇಲ್ಲಿ ಶಿಕ್ಷಣ ಪಡೆಯುತ್ತಿರುವುದು ಸಂಸ್ಥೆಗೆ ಕಿರೀಟಪ್ರಾಯವಾಗಿದೆ ಎಂದರು. ಕರ್ನಾಟಕ ಮಾತ್ರವಲ್ಲದೆ ತಮಿಳುನಾಡು, ಉತ್ತರ ಪ್ರದೇಶ, ದೆಹಲಿ ಸೇರಿದಂತೆ ದೇಶದ ವಿವಿಧೆಡೆ ಹಾಗೂ ದುಬೈ ಮತ್ತು ಮಾರಿಷಸ್ನಲ್ಲಿಯೂ ಜಿಎಸ್ಎಸ್ ಶಿಕ್ಷಣ ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿರುವುದು ರಾಜ್ಯದ ಕೀರ್ತಿಯನ್ನು ಹೆಚ್ಚಿಸಿದೆ ಎಂದು ಹೇಳಿದರು.
ಸುಮಾರು ₹4.5 ಕೋಟಿ ವೆಚ್ಚದಲ್ಲಿ ನಿರ್ಮಾಣಗೊಂಡಿರುವ ಪದವಿ ಪೂರ್ವ ಕಾಲೇಜು ಕಟ್ಟಡ ಮತ್ತು ಶ್ರೀ ಘನಲಿಂಗ ಶಿವಯೋಗಿ ಸಭಾಭವನವನ್ನು ಉದ್ಘಾಟಿಸಿರುವುದು ಸಂತಸ ತಂದಿದೆ. ಸೆಪ್ಟೆಂಬರ್ 7ರಂದು ಕಾರ್ಯಕ್ರಮ ನಿಗದಿಯಾಗಿತ್ತು. ಕಾರಣಾಂತರಗಳಿಂದ ಅಂದು ಬರಲು ಸಾಧ್ಯವಾಗಲಿಲ್ಲ. ಆದರೂ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿಗಳು ತಾವು ಬರುವವರೆಗೆ ಕಾದು, ತಮ್ಮ ಕೈಯಿಂದಲೇ ಉದ್ಘಾಟನೆ ಮಾಡಿಸಿದ್ದಾರೆ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಶಿಕ್ಷಣ ಸಚಿವನಾಗಿರುವುದಕ್ಕೆ ಹೆಮ್ಮೆ ಇದೆ
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ಸರ್ಕಾರದಲ್ಲಿ ಎರಡನೇ ಬಾರಿಗೆ ಸಚಿವನಾದ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಬೇರೆ ಖಾತೆ ಬೇಕೇ ಎಂದು ಕೇಳಿದ್ದರು. ಆದರೆ ತಾವು ಶಿಕ್ಷಣ ಇಲಾಖೆಯಲ್ಲಿಯೇ ಮುಂದುವರಿಯಲು ಬಯಸಿರುವುದಾಗಿ ತಿಳಿಸಿದ್ದೆ. ಶಿಕ್ಷಣ ಸಚಿವನಾಗಿರುವುದಕ್ಕೆ ಹೆಮ್ಮೆ ಇದೆ. ಶಿಕ್ಷಣ ಇಲಾಖೆಯಲ್ಲಿ ರಾಜ್ಯದ ಸರ್ಕಾರಿ ನೌಕರರ ಪೈಕಿ ಸುಮಾರು ಶೇ.38ರಷ್ಟು ಮಂದಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದು ಅತ್ಯಂತ ದೊಡ್ಡ ಇಲಾಖೆಯಾಗಿದೆ ಎಂದರು.
ತಾನು ಶಿಕ್ಷಣ ಸಚಿವನಾಗಿ ಅಧಿಕಾರ ವಹಿಸಿಕೊಂಡ ಸಂದರ್ಭದಲ್ಲಿ ರಾಜ್ಯದ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಸುಮಾರು 1.39 ಲಕ್ಷ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದರು. ಪರೀಕ್ಷಾ ಸುಧಾರಣೆ ಸೇರಿದಂತೆ ಕೈಗೊಂಡ ಕ್ರಮಗಳ ಪರಿಣಾಮವಾಗಿ ಇದೀಗ ಈ ಸಂಖ್ಯೆ 1.81 ಲಕ್ಷಕ್ಕೆ ಏರಿಕೆಯಾಗಿದೆ ಎಂದು ಸಚಿವರು ತಿಳಿಸಿದರು.
ಶಿಕ್ಷಣ ಸಚಿವರು ಮೇಲ್ಮನೆಯಲ್ಲಿ ಸಾಕಷ್ಟು ಟೀಕೆಗೆ ಒಳಗಾಗುತ್ತಾರೆ. ಆದರೆ ತಾವು ಎಲ್ಲರೊಂದಿಗೂ ಉತ್ತಮ ಸಂಬಂಧ ಹೊಂದಿದ್ದು, ಯಾರೊಂದಿಗೂ ವಿರೋಧ ಕಟ್ಟಿಕೊಂಡಿಲ್ಲ ಎಂದು ಸಚಿವ ಮಧು ಬಂಗಾರಪ್ಪ ಹೇಳಿದರು.
ಹಾಜರಾತಿ ಹೆಚ್ಚಿಸಲು ಅಕ್ಷಯ ಯೋಜನೆ ಜಾರಿಗೆ ತಂದಿದ್ದ ಬಂಗಾರಪ್ಪ
ತಮ್ಮ ತಂದೆ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಸಂದರ್ಭದಲ್ಲಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಹಾಜರಾತಿ ಹೆಚ್ಚಿಸಲು ಆ ಕಾಲದಲ್ಲೇ ಪ್ರತಿ ಮಗುವಿಗೆ ದಿನಕ್ಕೆ ಒಂದು ರೂಪಾಯಿ ನೀಡುವ ʻಅಕ್ಷಯʼ ಎಂಬ ಯೋಜನೆ ಜಾರಿಗೆ ತಂದಿದ್ದರು ಎಂದು ಮಧು ಬಂಗಾರಪ್ಪ ಸ್ಮರಿಸಿದರು.
ಜೆಎಸ್ಎಸ್ ಹಾಸ್ಟೆಲ್ನೊಂದಿಗೆ ನಂಟು
ಜೆಎಸ್ಎಸ್ ಹಾಸ್ಟೆಲ್ ನೊಂದಿಗೆ ತಾವು ಹೊಂದಿರುವ ವೈಯಕ್ತಿಕ ನಂಟನ್ನೂ ಸಚಿವರು ಇದೇ ಸಂದರ್ಭದಲ್ಲಿ ನೆನಪಿಸಿಕೊಂಡರು.
ಮೈಸೂರಿಗೆ ಶೂಟಿಂಗ್ ಕೆಲಸಕ್ಕಾಗಿ ಬಂದಾಗ ತಮ್ಮ ಸ್ನೇಹಿತರು ವಾಸವಿದ್ದ ಜಿಎಸ್ಎಸ್ ಹಾಸ್ಟೆಲ್ನಲ್ಲಿಯೇ ನಾನು ಉಳಿದುಕೊಳ್ಳುತ್ತಿದ್ದೆ. ಆಗ ತಾನು ಮುಖ್ಯಮಂತ್ರಿ ಅವರ ಮಗ ಎಂದು ಎಲ್ಲಿಯೂ ಹೇಳಿಕೊಳ್ಳುತ್ತಿರಲಿಲ್ಲ. ಹೇಳಿಕೊಂಡಿದ್ದರೆ ಬಹುಶಃ ಸ್ನೇಹಿತರೊಂದಿಗೆ ಜೆಎಸ್ಎಸ್ ಹಾಸ್ಟೆಲ್ನಲ್ಲಿ ಉಳಿಯಲು ಸಾಧ್ಯವಾಗುತ್ತಿರಲಿಲ್ಲ. ಬೇರೆ ಬೇರೆ ಮಕ್ಕಳಿಗೆ ಆಶ್ರಯ ನೀಡಿದಂತೆ ಜೆಎಸ್ಎಸ್ ಸಂಸ್ಥೆ ತಮಗೂ ಆಶ್ರಯ ನೀಡಿದೆ ಎಂದು ಸಚಿವ ಮಧು ಬಂಗಾರಪ್ಪ ಭಾವುಕರಾಗಿ ಸ್ಮರಿಸಿದರು.
ಮಧು ಬಂಗಾರಪ್ಪ ಉತ್ತಮ ಕೆಲಸ ಮಾಡುತ್ತಿದ್ದಾರೆ: ಜಿ.ಟಿ. ದೇವೇಗೌಡ
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ.ಟಿ. ದೇವೇಗೌಡ ಮಾತನಾಡಿ, ಮಧು ಬಂಗಾರಪ್ಪ ಅವರು ಶಿಕ್ಷಣ ಸಚಿವರಾಗಿ ಉತ್ತಮ ಕೆಲಸ ಮಾಡುತ್ತಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಮಧು ಎಂದರೆ ಸಿಹಿ. ಅವರ ಮನಸ್ಸೂ ಸಿಹಿಯಾಗಿದೆ. ಅವರು ರಾಜಕೀಯದಲ್ಲಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ಇನ್ನಷ್ಟು ಎತ್ತರಕ್ಕೆ ಬೆಳೆಯಲಿ ಎಂದು ಆಶಿಸಿದರು.
ಮೈಸೂರು ನಗರದ ಸರ್ಕಾರಿ ಶಾಲೆಗಳ ಸುಧಾರಣೆಗೆ ಸಚಿವರು ಹೆಚ್ಚಿನ ಆಸಕ್ತಿ ವಹಿಸಬೇಕು. ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ ಅವರು ಮೈಸೂರಿನ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಅದೇ ರೀತಿಯಲ್ಲಿ ಮಧು ಬಂಗಾರಪ್ಪ ಅವರೂ ಮೈಸೂರಿನ ಅಭಿವೃದ್ಧಿ ಹಾಗೂ ಶಿಕ್ಷಣ ಕ್ಷೇತ್ರದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಮನವಿ ಮಾಡಿದರು.
ಕಾರ್ಯಕ್ರಮದ ದಿವ್ಯ ಸಾನ್ನಿಧ್ಯವನ್ನು ಸುತ್ತೂರು ಶ್ರೀಕ್ಷೇತ್ರದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ವಹಿಸಿದ್ದರು. ಸಾಲೂರು ಬೃಹನ್ಮಠದ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ, ಶ್ರೀರಂಗಪಟ್ಟಣದ ಶ್ರೀ ತ್ರಿನೇತ್ರ ಮಹಾಂತ ಶಿವಯೋಗಿ ಸ್ವಾಮೀಜಿ ಸೇರಿದಂತೆ ವಿವಿಧ ಮಠಾಧೀಶರು ಉಪಸ್ಥಿತರಿದ್ದರು.
ವಿಧಾನ ಪರಿಷತ್ ಸದಸ್ಯ ಕೆ. ವಿವೇಕಾನಂದ ಅವರು ಕಂಪ್ಯೂಟರ್ ಲ್ಯಾಬ್ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್ ಸೇರಿದಂತೆ ಗಣ್ಯರು ಹಾಗೂ ಜೆಎಸ್ಎಸ್ ಸಂಸ್ಥೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.





