ವಿಜಯಪುರ, ಸೆಪ್ಟೆಂಬರ್, 6,2025 (www.justkannada.in): ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತಕ್ಕೆ ಸಂಬಂಧಿಸಿದಂತೆ ಮುಂದಿನ ವಾರದೊಳಗೆ ಸಭೆ ಕರೆದು ಭೂ ಪರಿಹಾರಕ್ಕೆ ದರ ನಿಗದಿ ಮಾಡಲಾಗುವುದು. ರೈತರು ಯಾರೂ ಪರಿಹಾರ ಕೊಡಿ ಎಂದು ನ್ಯಾಯಾಲಯಕ್ಕೆ ಹೋಗಬಾರದು. ಇದರಿಂದ ವಿಳಂಬವಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮನವಿ ಮಾಡಿದರು.
ಇಂದು ಜಲಸಂಪನ್ಮೂಲ ಇಲಾಖೆ ಹಾಗೂ ಕೃಷ್ಣ ಜಲ ಭಾಗ್ಯ ನಿಗಮ ನಿಯಮಿತ ವತಿಯಿಂದ ಆಯೋಜಿಸಲಾಗಿದ್ದ ಆಲಮಟ್ಟಿಯಲ್ಲಿರುವ ಲಾಲ್ ಬಹುದ್ದೂರ್ ಶಾಸ್ತ್ರೀ ಸಾಗರದ ಕೃಷ್ಣೆಗೆ ಗಂಗಪೂಜೆ ಹಾಗೂ ಬಾಗಿನವನ್ನು ಅರ್ಪಣೆ ಮಾಡಿ ನಂತರ ಮಾಧ್ಯಮದವರೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದರು.
ಕೃಷ್ಣಾ ಮೇಲ್ದಂಡೆ ಯೋಜನೆ ಕುರಿತು ರೈತ ಹೋರಾಟಗಾರರೊಂದಿಗೆ ಹಿಂದೆಯೇ ಬೆಳಗಾವಿಯಲ್ಲಿ ಸಭೆ ನಡೆಸಿತ್ತು. ಅಲ್ಲಿ ಎಲ್ಲರೂ ಒಪ್ಪಿಗೆ ನೀಡಿ ಎಂದಿರುವ ಹಿನ್ನೆಲೆಯಲ್ಲಿ ಸರ್ಕಾರವೂ ಒಪ್ಪಿಕೊಂಡಿದೆ. ಉಪಮುಖ್ಯಮಂತ್ರಿಗಳು ಇತ್ತೀಚೆಗೆ ಈ ಭಾಗದ ರೈತರು, ಶಾಸಕರೊಂದಿಗೆ ಸಭೆ ಕರೆದು ಚರ್ಚಿಸಿದ್ದು , ಒಪ್ಪಿಗೆ ಆದೇಶ ನೀಡುವುದು ಒಂದು ಹಂತಕ್ಕೆ ಬಂದಿದೆ. ಎಲ್ಲರ ಒಪ್ಪಿಗೆಯ ಮೇಲೆ ಒಪ್ಪಂದ ಮಾಡಿಕೊಳ್ಳಲಾಗುವುದು. ಮುಂದಿನ ವಾರದೊಳಗೆ ಈ ಬಗ್ಗೆ ಇತ್ಯರ್ಥ ಮಾಡಲಾಗುವುದು ಎಂದರು.
ಗೆಜೆಟ್ ಅಧಿಸೂಚನೆಯಾದರೆ ಅಣೆಕಟ್ಟು ಎತ್ತರಿಸಲು ಅನುಕೂಲ
ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತದಲ್ಲಿ 519.6 ಮೀ. ರಿಂದ 524.25 ಮೀಟರ್ ಗೆ ಎತ್ತರಿಸುವುದರಿಂದ 130 ಟಿಎಂಸಿ ನೀರನ್ನು ಸಂಗ್ರಹ ಮಾಡಿಕೊಳ್ಳಬಹುದಾಗಿದ್ದು, ಅದನ್ನು ಬಳಕೆ ಮಾಡಲು ಅನುಕೂಲವಾಗಲಿದೆ. 173 ಟಿಎಂಸಿ ನೀರನ್ನು 6.6 ಲಕ್ಷ ಹೆಕ್ಟೇರ್ ಪ್ರದೇಶಕ್ಕೆ ನೀರು ಒದಗಿಸಬಹುದಾಗಿದೆ. ಮೂರನೇ ಹಂತದ ಬಗ್ಗೆಯೂ ತೀರ್ಮಾನವಾಗಿದ್ದು, ಗೆಜೆಟ್ ಅಧಿಸೂಚನೆಯಾಗಿಲ್ಲ. ಇದಾದರೆ ನೀರಾವರಿ ಹಾಗೂ ಅಣೆಕಟ್ಟು ಎತ್ತರಿಸುವ ಕೆಲಸಗಳು ಆಗಲು ಅನುಕೂಲವಾಗಲಿದೆ ಎಂದರು.
ನೀರಾವರಿ ನಮ್ಮ ಆದ್ಯತಾ ವಲಯ
ಈ ವಿಚಾರಗಳ ಬಗ್ಗೆ ಮೂರು ಬಾರಿ ಸಂಬಂಧಪಟ್ಟ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳನ್ನು ಭೇಟಿ ಮಾಡಲಾಗಿದೆ. ಉಪಮುಖ್ಯಮಂತ್ರಿ ಐದು ಬಾರಿ ಭೇಟಿಯಾಗಿದ್ದಾರೆ. ನೀರಾವರಿ ನಮ್ಮ ಆದ್ಯತಾ ವಲಯ. ರೈತರಿಗೆ ಅನುಕೂಲವಾಗಬೇಕು. ರೈತರ ಜಮೀನುಗಳಿಗೆ ನೀರು ದೊರೆತು, ರೈತರ ಉತ್ಪನ್ನಗಳು ಹೆಚ್ಚಾಗಬೇಕು ಹಾಗೂ ಅವರ ಬದುಕು ಹಸನಾಗಬೇಕು ಎನ್ನುವುದು ನಮ್ಮ ಉದ್ದೇಶ. ಈ ನಿಟ್ಟಿನಲ್ಲಿ ನಾವು ಪ್ರಯತ್ನ ಮಾಡುತ್ತಿದ್ದೇವೆ ಎಂದರು.
ಡಿಸಿಎಂ ಡಿಕೆ ಶಿವಕುಮಾರ್ ಮಾತನಾಡಿ, ಕೃಷ್ಣಾ ಭಾಗ್ಯ ಜಲನಿಗಮದ ಕಚೇರಿ ವಿಜಯಪುರ ಮತ್ತು ಬೆಂಗಳೂರಿನಲ್ಲಿದ್ದರೂ, ರೈತರ ಬದುಕನ್ನು ಹಸನುಗೊಳಿಸಲು ಸಕ್ರಿಯವಾಗಿ ಕಾರ್ಯನಿರ್ವಹಿಸುವ ಉದ್ದೇಶವನ್ನು ಹೊಂದಿದೆ. ಸರ್ಕಾರ ರೈತರ ಬವಣೆಯನ್ನು ನಿವಾರಿಸಿ, ಸಮುದ್ರಕ್ಕೆ ವ್ಯರ್ಥವಾಗಿ ಸೇರುವ ಕೃಷ್ಣೆಯ ನೀರನ್ನು ಉಳಿಸಿ, ರೈತರ ಕೃಷಿ ಚಟುವಟಿಕೆಗೆ ಬಳಸುವಂತಾಗಬೇಕೆಂಬ ಆಶಯವನ್ನು ಮುಖ್ಯಮಂತ್ರಿಗಳು ಹಾಗೂ ನಾನು ಹೊಂದಿದ್ದು, ಈ ದಿಸೆಯಲ್ಲಿ ಚಿಂತನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು.
ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಹಂತಹಂತವಾಗಿ ಸ್ಥಾಪನೆ
ವಿಜಯಪುರ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಸ್ಥಾಪಿಸುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, ರಾಜ್ಯದ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆ ಸ್ಥಾಪಿಸುವ ಗುರಿಯಿದೆ. ಹಂತಹಂತವಾಗಿ ಈ ಗುರಿಯನ್ನು ಸಾಧಿಸಲಾಗುವುದು,. 2025-26 ನೇ ಬಜೆಟ್ ನಲ್ಲಿ ಬಾಗಲಕೋಟೆ, ಮಂಗಳೂರು, ಕೋಲಾರ ನಂತರ ವಿಜಯಪುರದಲ್ಲಿಯೂ ವೈದ್ಯಕೀಯ ಕಾಲೇಜು ಸ್ಥಾಪಿಸುವ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಕರ್ನಾಟಕ ರಾಜ್ಯದಲ್ಲಿ ಪ್ರತಿ ಜಿಲ್ಲೆಯಲ್ಲಿ ಮೆಡಿಕಲ್ ಕಾಲೇಜ್ ಸ್ಥಾಪನೆಯ ಯೋಜನೆ ಹಮ್ಮಿಕೊಂಡಿದ್ದು, ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಖಾಸಗಿ ಸಾರ್ವಜನಿಕ ಸಹಭಾಗಿತ್ವದಲ್ಲಿ ಕಾಲೇಜು ನಿರ್ಮಿಸಿ, ಸರ್ಕಾರಿ ದರದಲ್ಲಿ ಚಿಕಿತ್ಸೆ ನೀಡಬೇಕೆಂದು ಸೂಚನೆಯಂತೆ , ಅದರಂತೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಬಾನು ಮುಷ್ತಾಕ್ ರಿಂದ ದಸರಾ ಉದ್ಘಾಟನೆ: ಬಿಜೆಪಿಯಿಂದ ರಾಜಕೀಯ ಪ್ರೇರಿತ ವಿರೋಧ
ನಾಡಹಬ್ಬ ದಸರಾ ಉದ್ಘಾಟನೆಗೆ ಸಾಹಿತಿ ಬಾನು ಮುಷ್ತಾಕ್ ಅವರ ಆಯ್ಕೆಯನ್ನು ವಿರೋಧಿಸಿ, ಮಾಜಿ ಸಂಸದ ಪ್ರತಾಪ್ ಸಿಂಹ ಹೈಕೋರ್ಟ್ ಮೆಟ್ಟಿಲೇಲಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, ಈ ವಿಷಯವನ್ನು ಕೋರ್ಟ್ ತೀರ್ಮಾನಿಸಲಿ, ಆದರೆ ಈ ಹಿಂದೆ ಸಾಹಿತಿ ನಿಸ್ಸಾರ್ ಅಹ್ಮದ್ ಅವರು ಉದ್ಘಾಟಿಸುವುದನ್ನು ಯಾರು ವಿರೋಧಿಸಿರಲಿಲ್ಲ. ಟಿಪ್ಪು ಸುಲ್ತಾನ್ , ಮಿರ್ಜಾ ಇಸ್ಮಾಯಿಲ್ ಮೆರವಣಿಗೆಗಳನ್ನು ಏಕೆ ವಿರೋಧಿಸಲಿಲ್ಲ. ಬಿಜೆಪಿಯವರು ಬಾನು ಮುಷ್ತಾಕ್ ರವರು ರಾಜಕೀಯ ದುರುದ್ದೇಶದಿಂದ ನಾಡಹಬ್ಬ ಉದ್ಘಾಟಿಸುವುದನ್ನು ವಿರೋಧಿಸುತ್ತಿದ್ದು, ಸರ್ಕಾರ ರಾಜಕೀಯವಾಗಿಯೇ ಪ್ರತ್ಯುತ್ತರ ನೀಡಲಿದೆ. ಬಾನು ಮುಷ್ತಾಕ್ ರವರು ಕನ್ನಡಾಂಬೆಯ ಬಗ್ಗೆ ಹೀಗಳೆದು ಮಾತನಾಡಿರುವ ಬಗ್ಗೆ ಯಾವ ಪುರಾವೆಯಿಲ್ಲ. ಅವರು ಕನ್ನಡದಲ್ಲಿ ಬರೆದ ಕೃತಿಯ ಅನುವಾದಕ್ಕೆ ಬೂಕರ್ ಪ್ರಶಸ್ತಿ ಬಂದಿದೆ. ಆದ್ದರಿಂದ ರಾಜ್ಯ ಸರ್ಕಾರ ಸಾಹಿತಿಗಳಾದ ಬಾನು ಮುಷ್ತಾಕ್ ಹಾಗೂ ಅನುವಾದಿಸಿದ ದೀಪಾ ಬಸ್ತಿಯವರಿಗೆ ಸನ್ಮಾನಿಸಲಾಗಿದೆ. ಬಾನು ಮುಷ್ತಾಕ್ ರವರು ಕನ್ನಡ ಸಾಹಿತಿಯಾಗಿರುವ ಕಾರಣ ಅವರಿಂದ ದಸರಾವನ್ನು ಉದ್ಘಾಟಿಸಲಾಗುತ್ತಿದೆ ಎಂದರು.
ರೈತರ ಹಿತರಕ್ಷಣೆಗೆ ಸರ್ಕಾರ ಬದ್ಧ
ಬಾಗಲಕೋಟೆಯ ಮಲ್ಲಪ್ರಭಾ ನದಿ ಹಾಗೂ ವಿಜಯಪುರ ಜಿಲ್ಲೆಯ ಡೋಣಿ ನದಿ ಪ್ರವಾಹಕ್ಕೀಡಾಗಿ ರೈತರಿಗೆ ಹಾನಿಯುಂಟಾಗುತ್ತಿದ್ದು, ಇದಕ್ಕೆ ಶಾಶ್ವತ ಪರಿಹಾರ ಕೈಗೊಳ್ಳಲಾಗಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿ, ರೈತರಿಗೆ ತೊಂದರೆಯಾಗದಂತೆ ಕ್ರಮ ವಹಿಸಲು ಸರ್ಕಾರ ಬದ್ಧವಾಗಿದೆ ಎಂದರು.
ಅಧಿಸೂಚನೆ ಹೊರಡಿಸಲು ಕೇಂದ್ರಕ್ಕೆ ಒತ್ತಾಯ
ಯುಕೆಪಿ ಹಂತ 3 ಕ್ಕೆ ಸಂಬಂಧಿಸಿದಂತೆ ಕೇಂದ್ರದ ಅಧಿಸೂಚನೆಗೆ ಸಂಬಂಧಪಟ್ಟ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಅಧಿಸೂಚನೆಯನ್ನು ಆದಷ್ಟು ಜಾಗೃತೆಯಾಗಿ ಹೊರಡಿಸಲು ಕೇಂದ್ರದ ಮೇಲೆ ಹಲವು ಬಾರಿ ಒತ್ತಡ ಹೇರಲಾಗಿದೆ. ಅಧಿಸೂಚನೆ ಹೊರಡಿಸಿದ ನಂತರ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದರು.
ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆಗೆ ಶಿಫಾರಸ್ಸು
ಇವಿಎಂ ನ ಸಂಬಂಧಿಸಿದಂತೆ ಕೇಂದ್ರ ಸರ್ಕಾರದಿಂದ ಮತದಾನವನ್ನು ತಿರುಚಲಾಗಿದೆ ಎಂದು ಸಚಿವ ಎಚ್.ಕೆ.ಪಾಟೀಲ್ ಹೇಳಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿ, ಇವಿಎಂ ನ ಗೊಂದಲ ಹಾಗೂ ತಕರಾರುಗಳಿಗೆ ಆಸ್ಪದ ನೀಡದಿರಲು, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಮೂಲಕ ಚುನಾವಣೆ ನಡೆಸುವಂತೆ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡಲಾಗುವುದು. ಪ್ರಪಂಚದ ವಿವಿಧ ದೇಶಗಳಲ್ಲಿ ಇವಿಎಂ ವ್ಯವಸ್ಥೆಯನ್ನು ತೊರೆದು, ಪುನ: ಮತಪತ್ರಗಳಿಗೆ ಮೊರೆ ಹೋಗಿವೆ ಎಂದು ತಿಳಿಸಿದರು.
Key words: Krishna Upper River Project, Phase 3, land compensation, CM Siddaramaiah
The post ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತ: ವಾರದೊಳಗೆ ಭೂ ಪರಿಹಾರಕ್ಕೆ ದರ ನಿಗದಿ: ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





