ಬೆಂಗಳೂರು,ಸೆಪ್ಟಂಬರ್,27,2025 (www.justkannada.in): ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳ ಮುಚ್ಚುವ ಕಾಮಗಾರಿಗಳ ಪರಿಶೀಲನೆ ನಡೆಸಲು ಸಿಎಂ ಸಿದ್ದರಾಮಯ್ಯ ಇಂದು ನಗರ ಪ್ರದಕ್ಷಿಣೆ ಹಾಕಿದರು. ಈ ವೇಳೆ ರಸ್ತೆಯಲ್ಲಿ ಘನ ತ್ಯಾಜ್ಯ ಚೆಲ್ಲಿದ್ದಕ್ಕೆ ಅಧಿಕಾರಿಗಳಿಗೆ ಕ್ಲಾಸ್ ತೆಗೆದುಕೊಂಡ ಘಟನೆ ನಡೆಯಿತು.
ಮಾರ್ಗ ಮಧ್ಯದಲ್ಲಿ ರಿಂಗ್ ರಸ್ತೆಯ ಬದಿಯಲ್ಲಿ ಸಿಸಿ ಕ್ಯಾಮರಾ ಇಲ್ಲದಿರುವ ಜಾಗದಲ್ಲಿ ಹಳೆ ಕಟ್ಟಡ ತ್ಯಾಜ್ಯ ಸುರಿದಿರುವುದನ್ನು ಗಮನಿಸಿದ ಸಿಎಂ ಸಿದ್ದರಾಮಯ್ಯ, ತಮ್ಮ ವಾಹನ ಚಾಲಕ ನವೀನ್ ಗೆ ಕಾರು ನಿಲ್ಲಿಸುವಂತೆ ಸೂಚಿಸಿದರು. ಕಾರಿನಿಂದ ಇಳಿದ ಸಿಎಂ ಸಿದ್ದರಾಮಯ್ಯ ಈ ಜಾಗದಲ್ಲಿ ತ್ಯಾಜ್ಯ ಸುರಿದಿರುವವರನ್ನು ಪತ್ತೆ ಹಚ್ಚಿ ಅವರ ವಾಹನ ಸೀಜ್ ಮಾಡಿ ಕೇಸು ದಾಖಲಿಸುವಂತೆ ಸೂಚಿಸಿದರು.
ಬಳಿಕ, ಅಧಿಕಾರಿಗಳೇನು ರಸ್ತೆಯಲ್ಲಿ ಕಣ್ಣು ಮುಚ್ಚಿಕೊಂಡು ಓಡಾಡ್ತೀರಾ? ರಸ್ತೆಗೆ ತ್ಯಾಜ್ಯ ಸುರಿದಿರುವುದನ್ನು ಗಮನಿಸೋಕೆ ಆಗೋದಿಲ್ಲವಾ ಎಂದು ಬಿಬಿಎಂಪಿ, ಬಿಡಿಎ ಮತ್ತು ಟ್ರಾಫಿಕ್ ಪೊಲೀಸರನ್ನು ಖಾರವಾಗಿ ಪ್ರಶ್ನಿಸಿ ಸೂಕ್ತ ಕ್ರಮಕ್ಕೆ ಸೂಚಿಸಿದರು.
ಹೆಣ್ಣೂರು ಫ್ಲೈಓವರ್ ಕೆಳಗೆ ಕಟ್ಟಡ ನಿರ್ಮಾಣ ತ್ಯಾಜ್ಯ ಸುರಿದಿದ್ದು, ಅದರೊಳಗೆ ತಲೆ ಎತ್ತರಕ್ಕೆ ಗಿಡಗಳು ಬೆಳೆದು ನಿಂತಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಗರಂ ಆದರು. ಇದು ತುಂಬಾ ಹಳೆ ತ್ಯಾಜ್ಯ…ಇಷ್ಟು ವರ್ಷ ಎಷ್ಟು ಜನ ಅಧಿಕಾರಿಗಳು ಇಲ್ಲಿ ಓಡಾಡಿರುತ್ತೀರಿ. ಯಾರಿಗೂ ಕಣ್ಣಿಗೇ ಬಿದ್ದಿಲ್ವಾ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿ 24 ಗಂಟೆಗಳ ಒಳಗೆ ತ್ಯಾಜ್ಯ ತೆರವುಗೊಳಿಸುವಂತೆ ಖಡಕ್ ಸೂಚನೆ ನೀಡಿದರು.
ರಾಘವೇಂದ್ರ ಪ್ರಸಾದ್ ಮತ್ತು ಪ್ರಹ್ಲಾದ್ ಗೆ ನೋಟಿಸ್ ಕೊಡಲು ಸಿಎಂ ಸೂಚನೆ
ವಾರ್ಡ್ ನಂಬರ್ 23 ರ ಘನ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಒಳಗೆ ಇರಬೇಕಾದ ತ್ಯಾಜ್ಯ ಸಂಗ್ರಹಣಾ ಕೇಂದ್ರದ ಹೊರಗೆ ಬಂದು ರಾಶಿ ಬಿದ್ದಿರುವುದನ್ನು ಗಮನಿಸಿದ ಸಿಎಂ ಸಿದ್ದರಾಯ್ಯ ಸಿಟ್ಟಾದರು. ಸಂಗ್ರಹಣಾ ಕೇಂದ್ರದ ಒಳಗೆ ಸಾಕಷ್ಟು ಜಾಗ ಖಾಲಿ ಇರುವುದನ್ನು ಗಮನಿಸಿದ ಸಿಎಂ ಚೀಫ್ ಎಂಜಿನಿಯರ್ ಪ್ರಹ್ಲಾದ್ ಅವರಿಗೆ ನೋಟಿಸ್ ನೀಡಲು ಸೂಚನೆ ನೀಡಿದರು.
ಬಳಿಕ ಅಲ್ಲಿಂದ ಕೆಲವೇ ದೂರದಲ್ಲಿ ರಸ್ತೆಯಲ್ಲಿ ಜೆಲ್ಲಿ ಕಲ್ಲುಗಳು ಬಿದ್ದಿರುವುದನ್ನು ಗಮನಿಸಿ ಇದಕ್ಕೆ ಕಾರಣರಾದ ಮತ್ತೋರ್ವ ಎಂಜಿನಿಯರ್ ಚೀಫ್ ರಾಘವೇಂದ್ರ ಪ್ರಸಾದ್ ಅವರಿಗೂ ನೋಟಿಸ್ ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚಿಸಿದರು.
ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು: ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸಿಎಂ ಸೂಚನೆ
ಹೆಣ್ಣೂರಿನ ಬಾಗಲೂರು ರಸ್ತೆಯಲ್ಲಿ ವೈಟ್ ಟಾಪಿಂಗ್ ಮಾಡಲು ಆರಿಸಿಕೊಂಡ ರಸ್ತೆಗಳಲ್ಲಿ ಗುಂಡಿಗಳು ಬಿದ್ದಿರುವುದರ ಹೊಣೆಯನ್ನು ಗುತ್ತಿಗೆದಾರರೇ ಹೊರಬೇಕಿದೆ. ಒಮ್ಮೆ ವೈಟ್ ಟಾಪಿಂಗ್ ಗೆ ರಸ್ತೆಯನ್ನು ಒಪ್ಪಿಸಿದ ಮೇಲೆ ಆ ರಸ್ತೆಗಳ ನಿರ್ವಹಣೆಗೆ ಬಿಬಿಎಂಪಿ ಹಣ ಕೊಡಲು ಬರುವುದಿಲ್ಲ. ವೈಟ್ ಟಾಪಿಂಗ್ ಮುಗಿಯುವಾಗ 2-3 ವರ್ಷ ಆಗುತ್ತದೆ. ಅಲ್ಲಿಯವರೆಗೂ ಗುತ್ತಿಗೆದಾರರೇ ರಸ್ತೆಗಳ ನಿರ್ವಹಣೆ ಮಾಡಬೇಕು. ಆದರೆ ಹೇಳೋರು ಕೇಳೇರು ಇಲ್ಲದಂತೆ ಗುತ್ತಿಗೆದಾರರು ವರ್ತಿಸುತ್ತಾರೆ ಎಂದು ಅಧಿಕಾರಿಗಳು ತಿಳಿಸಿದರು. ಸಮರ್ಪಕ ನಿರ್ವಹಣೆ ಮಾಡದ ವೈಟ್ ಟಾಪಿಂಗ್ ಗುತ್ತಿಗೆದಾರರು ಮತ್ತು ಎಂಜಿನಿಯರ್ ಗಳ ವಿರುದ್ದ ಕ್ರಮಕ್ಕೆ ಸೂಚನೆ ನೀಡಿದರು.
ಮೆಟ್ರೋ ಕಾಮಗಾರಿ ಆಗುವಾಗ ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ: ವೈಟ್ ಟಾಪಿಂಗ್ ರಸ್ತೆ ಹಾಳು: ದುರಸ್ತಿಗೆ ಸಿಎಂ ಸೂಚನೆ
ಮೆಟ್ರೋ ಕಾಮಗಾರಿ ಆಗುವಾಗ ಮೆಟ್ರೋದವರು ಸರ್ವೀಸ್ ರಸ್ತೆಗಳ ನಿರ್ಲಕ್ಷ್ಯ ಮಾಡಿರುವುದು, ರಸ್ತೆ ಬದಿ ನೀರು ನಿಲ್ಲುವಂತೆ ಮಾಡಿರುವುದು, ನೀರು ಸರಾಗವಾಗಿ ಹರಿಯಲು ಇರುವ ವ್ಯವಸ್ಥೆಯನ್ನೂ ಮುಚ್ಚಿಸಿರುವ ಬಗ್ಗೆ ಹಾಗೂ ವೈಟ್ ಟಾಪಿಂಗ್ ರಸ್ತೆ ಹಾಳು ಮಾಡಿರುವ ಬಗ್ಗೆ ಅಧಿಕಾರಿಗಳು ಸಿಎಂ ಸಿದ್ದರಾಮಯ್ಯನವರ ಗಮನಕ್ಕೆ ತಂದರು. ಎಲ್ಲವನ್ನೂ ಗಮನಿಸಿದ ಸಿಎಂ ತಕ್ಷಣ ದುರಸ್ತಿಗೆ ಹಾಗೂ ಸರ್ವೀಸ್ ರಸ್ತೆಗಳ ನಿರ್ವಹಣೆಗೆ ಸೂಚನೆ ನೀಡಿದರು.
Key words: CM Siddaramaiah, Bangalore, City rounds, Solid waste, road, officers,
The post ರಸ್ತೆಯಲ್ಲಿ ಘನ ತ್ಯಾಜ್ಯ: ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಕ್ಲಾಸ್: ಕೇಸ್ ದಾಖಲಿಸಿಲು ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





