ಮೈಸೂರು,ಮಾರ್ಚ್,14,2026 (www.justkannada.in): ಮೈಸೂರು–ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ನಗರದ ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ನಲ್ಲಿ ನ್ಯಾಷನಲ್ ಹೈವೇ ಅಥಾರಿಟಿ ಆಫ್ ಇಂಡಿಯಾ (NHAI) ವತಿಯಿಂದ ನಡೆಯುತ್ತಿರುವ ಕಾಮಗಾರಿಗಳ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಕಾಮಗಾರಿಗೆ ಸಂಬಂಧಿಸಿದ ಅನುಮೋದನೆ 2026ರ ಜನವರಿ 19ರಂದು ನವದೆಹಲಿಯಲ್ಲಿ ಅಧಿಕಾರಿಗಳೊಂದಿಗೆ ನಡೆದ ಸಭೆಯ ನಂತರ ನೀಡಲಾಗಿತ್ತು. ಅದರ ಅನ್ವಯವಾಗಿ ನಡೆಯುತ್ತಿರುವ ಕಾಮಗಾರಿಗಳ ಪ್ರಗತಿಯನ್ನು ಸಂಸದ ಯದುವೀರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.
ಈ ಸಂದರ್ಭದಲ್ಲಿ ಎನ್ಎಚ್ಎಐ ಯೋಜನಾ ನಿರ್ದೇಶಕರು, ಮಹಾನಗರ ಪಾಲಿಕೆಯ ಇಂಜಿನಿಯರ್ ಹಾಗೂ ಅರಣ್ಯ ಸಂರಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಈ ವೇಳೆ ಮಾತನಾಡಿದ ಸಂಸದ ಯದುವೀರ್, “ಕಾಮಗಾರಿಯನ್ನು ಶೀಘ್ರಗತಿಯಲ್ಲಿ ಪೂರ್ಣಗೊಳಿಸಲು ಎನ್ಎಚ್ಎಐ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಕಾಮಗಾರಿಗಳಿಂದ ಸಾರ್ವಜನಿಕರಿಗೆ ಯಾವುದೇ ತೊಂದರೆ ಉಂಟಾಗದಂತೆ ನೋಡಿಕೊಳ್ಳಬೇಕು. ವಾರಾಂತ್ಯಗಳಲ್ಲಿ ಹೆಚ್ಚಿನ ವಾಹನ ಸಂಚಾರ ಇರುವುದರಿಂದ ಹೆಚ್ಚುವರಿ ಟ್ರಾಫಿಕ್ ಪೊಲೀಸರನ್ನು ನಿಯೋಜಿಸುವ ಬಗ್ಗೆ ಟ್ರಾಫಿಕ್ ಪೊಲೀಸ್ ಅಧಿಕಾರಿಗಳೊಂದಿಗೆ ಮಾತನಾಡುತ್ತೇನೆ. ಜೊತೆಗೆ ಕಾಮಗಾರಿಗಳು ಅತ್ಯುತ್ತಮ ಗುಣಮಟ್ಟದಲ್ಲಿ ನಡೆಯಬೇಕು ಹಾಗೂ ಸುತ್ತಮುತ್ತಲಿನ ಪ್ರದೇಶವನ್ನು ಸ್ವಚ್ಛವಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ತಿಳಿಸಿದ್ದೇನೆ,” ಎಂದು ಹೇಳಿದರು.
ಇದಲ್ಲದೆ, “ಈ ಯೋಜನೆಯಿಂದ ಈ ಜಂಕ್ಷನ್ ನಲ್ಲಿರುವ ಟ್ರಾಫಿಕ್ ಬಾಟಲ್ ನೇಕ್ ಸಮಸ್ಯೆ ನಿವಾರಣೆಯಾಗಲಿದೆ. ಜೊತೆಗೆ ಮೈಸೂರು–ಬೆಂಗಳೂರು ರಸ್ತೆಯ ಪ್ರವೇಶ ಹಾಗೂ ನಿರ್ಗಮನ ವ್ಯವಸ್ಥೆಯನ್ನೂ ಈ ಯೋಜನೆಯಡಿ ಸುಧಾರಿಸಲಾಗುತ್ತದೆ. ಇದರಿಂದ ಈ ರಸ್ತೆಯನ್ನು ಬಳಸುವ ಎಲ್ಲಾ ಸಾರ್ವಜನಿಕರಿಗೆ ಹೆಚ್ಚಿನ ಅನುಕೂಲವಾಗಲಿದೆ,” ಎಂದು ಸಂಸದ ಯದುವೀರ್ ಒಡೆಯರ್ ತಿಳಿಸಿದ್ದಾರೆ.
Key words: MP Yaduveer, inspects, Mysore, Kempegowda Circle, works
The post ಕೆಂಪೇಗೌಡ ವೃತ್ತ (ಮಣಿಪಾಲ್ ಜಂಕ್ಷನ್) ಕಾಮಗಾರಿಗಳ ಪರಿಶೀಲಿಸಿದ ಸಂಸದ ಯದುವೀರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.





